×
ದೇವರಾಜ ಅರಸು ಅವರ ಕಾರ್ಯಕ್ರಮಗಳ ಫಲಾನುಭವಿಗಳು ಶಾಶ್ವತವಾಗಿ ಸಾಮಾಜಿಕ ನ್ಯಾಯದ ಪರವಾಗಿರಬೇಕು: ಮುಖ್ಯಮಂತ್ರಿ

 

(ವಿಧಾನಸೌಧ, ಬೆಂಗಳೂರು), ಆಗಸ್ಟ್ 20, 2023:

ದೇವರಾಜ ಅರಸು ಅವರ ಕಾರ್ಯಕ್ರಮಗಳ ಅನುಕೂಲವ ಪಡೆದ ಫಲಾನುಭವಿಗಳು ಮತ್ತು ಅವರ ಮಕ್ಕಳು ಶಾಶ್ವತವಾಗಿ ಸಾಮಾಜಿಕ ನ್ಯಾಯದ ಪರವಾಗಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯುವ ಸಮೂಹಕ್ಕೆ ಕರೆ ನೀಡಿದರು. 

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ದೇವರಾಜು ಅರಸು ಅವರ 108 ನೇ ಜನ್ಮ ದಿನಾಚರಣೆ ಹಾಗೂ ಡಿ.ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, ಅರಸು ಪ್ರಶಸ್ತಿ ವಿತರಿಸಿ ಮಾತನಾಡಿದರು. 

ಕನ್ನಡ ನೆಲ ಸಾಮಾಜಿಕ ನ್ಯಾಯವನ್ನು ಕ್ರಾಂತಿಕಾರಿಯಾಗಿ ಜಾರಿ ಮಾಡಿದ ಇತಿಹಾಸ ಹೊಂದಿದೆ. ಬಸವಣ್ಣನವರಿಂದ ಹಿಡಿದು ಕೃಷ್ಣರಾಜ ಒಡೆಯರು ಮತ್ತು ದೇವರಾಜ ಅರಸು ಅವರ ವರೆಗೂ ಸಾಮಾಜಿಕ ನ್ಯಾಯ ಒದಗಿಸಿದ ಚರಿತ್ರೆ ನಮ್ಮ ನಾಡಿಗೆ ಇದೆ.‌ 

ಅಧಿಕಾರ ಮತ್ತು ಸಂಪತ್ತು ಕೆಲವರ ಕೈಯಲ್ಲಿ ಮಾತ್ರ ಇರಬಾರದು ಎನ್ನುವ ಆಶಯ ಬಸವಣ್ಣನವರ ಕಾಲದಿಂದಲೂ ಈ ನೆಲದಲ್ಲಿ ನೆಲೆಯೂರಿದೆ. 

ದೇವರಾಜ ಅರಸರು ಜಾರಿಗೆ ತಂದಿದ್ದು, ಕಾಗೋಡು ತಿಮ್ಮಪ್ಪನವರು ಹೋರಾಟ ಮಾಡಿದ್ದು ಉಳುವವನೇ ಭೂಮಿ ಒಡೆಯ ಆಗಬೇಕು ಎನ್ನುವುದಾಗಿತ್ತು. ಆದರೆ ಈಗ ಬಿಜೆಪಿ ಬಂದ ಮೇಲೆ "ಉಳ್ಳವನೇ ಭೂಮಿ ಒಡೆಯ" ಎನ್ನುವಂತಾಗಿದೆ ಎಂದು ಟೀಕಿಸಿದರು. 

ಕಾಗೋಡು ಹೋರಾಟ ಮತ್ತು ಗೇಣಿ ಹೋರಾಟದ ಫಲಾನುಭವಿಗಳು ಮತ್ತು ಈಗಿನ ಪೀಳಿಗೆಯ ಯುವಕ, ಯುವತಿಯರು ಇದನ್ನೆಲ್ಲಾ ಅರ್ಥ ಮಾಡಿಕೊಳ್ಳಬೇಕು. ಸಾಮಾಜಿಕ ನ್ಯಾಯದ ಪರವಾಗಿ ಇರಬೇಕು ಎಂದರು. 

ಸಂವಿಧಾನದಲ್ಲಿ ಮೀಸಲಾತಿಗೆ ಅವಕಾಶ ಇದ್ದರೂ ಅದು ಜಾರಿ ಆಗಿರಲಿಲ್ಲ. ರಾಜ್ಯದಲ್ಲಿ ದೇವರಾಜು ಅರಸರು‌ ಮುಖ್ಯಮಂತ್ರಿಯಾಗಿ ಹಾವನೂರು ವರದಿ ತರಿಸಿಕೊಂಡು ಅದನ್ನು ಜಾರಿ ಮಾಡುವ ಎದೆಗಾರಿಕೆ ತೋರಿಸಿದರು. ಹೀಗೆ ಮಾಡುವಾಗ ಎಲ್ಲಾ ಜಾತಿ-ಸಮುದಾಯಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡರು. ಆ ಮೂಲಕ ಸಂವಿಧಾನ ಬದ್ದವಾದ ಮೀಸಲಾತಿಯನ್ನು ಕನ್ನಡ ನೆಲದಲ್ಲಿ ಜಾರಿ ಮಾಡಿದರು ಎಂದು ವಿವರಿಸಿದರು. 

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ಎಸ್ ತಂಗಡಗಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ , ಶಾಸಕ ಗೋಪಾಲಕೃಷ್ಣ ಬೇಳೂರು, ನಾಗರಾಜ ಯಾದವ್, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಉಪಸ್ಥಿತರಿದ್ದರು. 

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು.

 

 

ಕಾಗೋಡು ತಿಮ್ಮಪ್ಪ ಅವರಿಂದ ಅರಸು ಪ್ರಶಸ್ತಿಯ ಮೌಲ್ಯ ಹೆಚ್ಚಾಗಿದೆ:

ಸಮಾಜವಾದಿ ಚಳವಳಿ ಮತ್ತು ಗೇಣಿ ಹೋರಾಟಗಾರ ಕಾಗೋಡು ತಿಮ್ಮಪ್ಪ ಅವರಿಗೆ ದೇವರಾಜು ಅರಸು ಪ್ರಶಸ್ತಿ ಲಭಿಸಿರುವುದರಿಂದ ಪ್ರಶಸ್ತಿಯ ಮೌಲ್ಯ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. 

ನಾನು ಮುಖ್ಯಮಂತ್ರಿ ಆಗಿರುವ ಅವಧಿಯಲ್ಲೇ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿ ಲಭಿಸಿರುವುದು ನನಗೆ ಅತ್ಯಂತ ಖುಷಿಯಾಗಿದೆ. ಬಹಳಷ್ಟು ಯುವ ನಾಯಕರನ್ನು ಕಾಗೋಡು ತಿಮ್ಮಪ್ಪ ಬೆಳೆಸಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

********** 

 

 

 

 

×
ABOUT DULT ORGANISATIONAL STRUCTURE PROJECTS