
ಮೈಸೂರು, ಸೆಪ್ಟೆಂಬರ್ 26, 2023:
ಪಶುಸಂಗೋಪನೆ, ಗೋ ಸಂಪತ್ತು ಹೆಚ್ಚಿದಷ್ಟೂ ನಾಡಿನ ಸಂಪತ್ತು ಹೆಚ್ಚಿ ನಾಡಿನ ಆರ್ಥಿಕತೆಯೂ ಪ್ರಗತಿ ಕಾಣುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸರ್ಕಾರಿ ಉತ್ತನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಪಶುಸಖಿಯರ ತರಬೇತಿ ಕಾರ್ಯಕ್ರಮ, ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ನೂತನ ಪಶು ಚಿಕಿತ್ಸಾಲಯವನ್ನು ಉದ್ಘಾಟಿಸಿ ಮಾತನಾಡಿದರು.

ಹಾಲು ಉತ್ಪಾದಕರು ಸಹಕಾರಿ ಕ್ಷೇತ್ರದಲ್ಲಿ ಆರ್ಥಿಕ ಹರಿವಿಗೆ ಕಾರಣರಾಗಿದ್ದಾರೆ. ಹಾಲು ಒಕ್ಕೂಟಗಳು ರಚನೆಯಾಗಿದ್ದೇ ರೈತರ, ಹಾಲು ಉತ್ಪಾದಕರ ಶೋಷಣೆ ತಪ್ಪಿಸುವುದಕ್ಕಾಗಿ. ಕೆಎಂಎಫ್ ಮತ್ತು ಡೈರಿಗಳಲ್ಲಿ ಅಧಿಕಾರಿಗಳ ಏಕಸ್ವಾಮ್ಯ ತಪ್ಪಿಸಲು ಹಾಲು ಒಕ್ಕೂಟಗಳಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಪಶುಸಂಗೋಪನಾ ಸಚಿವನಾಗಿ ಮಾಡಿದ್ದೆ ಎಂದು ಸ್ಮರಿಸಿದರು.
ರಾಜ್ಯದಲ್ಲಿ ಹಾಲಿನ ಉತ್ಪಾದನೆ ಇನ್ನಷ್ಟು ಹೆಚ್ಚಿಸಲು ಮತ್ತು ಅದನ್ನು ಮಾರಾಟ ಮಾಡುವುದಕ್ಕೂ ಸಾಕಷ್ಟು ಅವಕಾಶಗಳಿವೆ. ನಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ರಾಜ್ಯದಲ್ಲಿ ಹಾಲಿನ ಉತ್ಪಾದನೆ ಹೆಚ್ಚಾಗಿತ್ತು. ಆಗ ನಾನು ಕ್ಷೀರಭಾಗ್ಯ ಕಾರ್ಯಕ್ರಮವನ್ನು ಜಾರಿಗೆ ತಂದು ಮಕ್ಕಳಲ್ಲಿ ಪೌಷ್ಠಿಕಾಂಶ ಹೆಚ್ಚಿಸುವ ಜತೆಗೆ ರೈತರಿಗೆ ಪ್ರತಿ ಲೀಟರ್ ಗೆ 5 ರೂ ಪ್ರೋತ್ಸಾಹದನದ ಮೂಲಕ ಅನುಕೂಲ ಆಗುವ ಕಾರ್ಯಕ್ರಮವನ್ನು ರೂಪಿಸಿದ್ದೆ ಎಂದು ವಿವರಿಸಿದರು.
ನಾನು ಈ ಹಿಂದೆ ಪಶುಸಂಗೋಪನಾ ಸಚಿವನಾಗಿ ಮಾಡಿದ ಒಳ್ಳೆಯ ಕೆಲಸಗಳು ನನ್ನನ್ನು ಎರಡು ಬಾರಿ ಮುಖ್ಯಮಂತ್ರಿ ಆಗುವವರೆಗೂ ಕೈಹಿಡಿದಿವೆ. 14 ಬಾರಿ ಚುನಾವಣೆಗೆ ಸ್ಪರ್ಧಿಸಿದ್ದ ನನ್ನನ್ನು ಚಾಮುಂಡೇಶ್ವರಿ, ವರುಣ ಮತ್ತು ಬಾದಾಮಿಯ ಮತದಾರರು 9 ಬಾರಿ ಗೆಲ್ಲಿದ್ದಾರೆ. ಪ್ರಜಾಪ್ರಭುತ್ವಕ್ಕೆ ಜನರೇ ನಿಜವಾದ ಮಾಲೀಕರು ಎಂದು ಕೃತಜ್ಞತೆ ಸಲ್ಲಿಸಿದರು.
ಹಸು, ಎಮ್ಮೆ, ಕುರಿ, ಮೇಕೆ ತಳಿಗಳ ಉಳಿಸುವ ಮತ್ತು ಅಭಿವೃದ್ಧಿ ಪಡಿಸುವ ಹೊಣೆಗಾರಿಕೆಯನ್ನು ಪಶುಸಂಗೋಪನಾ ಇಲಾಖೆ ಯಶಸ್ವಿಯಾಗಿ ನಿರ್ವಹಿಸುತ್ತಿದೆ. ಆರೋಗ್ಯ ಇಲಾಖೆಯಲ್ಲಿ ಆಶಾ ಕಾರ್ಯಕರ್ತರು ಮಾಡುತ್ತಿರುವ ಉತ್ತಮ ಕಾರ್ಯವನ್ನೇ ಪಶು ಇಲಾಖೆಯಲ್ಲಿ ಪಶುಸಖಿಯರು ನಿರ್ವಹಿಸುತ್ತಾರೆ. ಇವರು ಪಶುಪಾಲಕರು, ರೈತರು ಮತ್ತು ಸರ್ಕಾರದ ನಡುವೆ ಸೇತುವೆಯಂತೆ ಕಾರ್ಯ ನಿರ್ವಹಿಸುತ್ತಾರೆ ಎಂದು ಮೆಚ್ಚುಗೆ ಸೂಚಿಸಿದರು.
ಸರ್ಕಾರ ರೈತರಿಗೆ, ಪಶುಪಾಲಕರಿಗೆ, ಕುರಿ, ಕೋಳಿ ಸಾಕಾಣಿಕೆದಾರರಿಗೆ ಹಲವು ಪ್ರಯೋಜನಕಾರಿ ಕಾರ್ಯಕ್ರಮಗಳನ್ನು ನೀಡಿದೆ. ಇವೆಲ್ಲವನ್ನೂ ರೈತರ ಮನೆ ಬಾಗಿಲಿಗೆ ತಲುಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಹೆಚ್. ಸಿ.ಮಹದೇವಪ್ಪ ಅವರು ಅಧ್ಯಕತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹಾಗೂ ಜಿಲ್ಲೆಯ ಶಾಸಕರುಗಳಾದ ಸಿ.ಅನಿಲ್ ಕುಮಾರ್, ಡಿ.ರವಿಶಂಕರ್, ಕೆ.ಹರೀಶ್ ಗೌಡ, ದರ್ಶನ್ ದ್ರುವನಾರಾಯಣ್, ಜಿ.ಡಿ.ಹರೀಶ್ ಗೌಡ ಮತ್ತು ವಿಧಾನ ಪರಿಷತ್ ಸದಸ್ಯರುಗಳಾದ ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮರಿತಿಬ್ಬೇಗೌಡ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇಡಿ ದಿನದ ಕಾರ್ಯಕ್ರಮಗಳು:
- ಏರ್ ಪೋರ್ಟ್ ನಿಂದ ನೇರವಾಗಿ ಉತ್ತನಹಳ್ಳಿ ಮಾರಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
- ಉತ್ತನಹಳ್ಳಿ ಅಂಬೇಡ್ಕರ್ ಭವನದ ಉದ್ಘಾಟನೆ ನೆರವೇರಿಸಿದರು.
- ಕನಕದಾಸ ಮತ್ತು ಸಂಗೊಳ್ಳಿರಾಯಣ್ಣ ಪುತ್ಥಳಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
- ಪಶು ಆಸ್ಪತ್ರೆ ಉದ್ಘಾಟಿಸಿದರು.
ಪ್ರತಿಯೊಬ್ಬರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ: ನೂತನ ಡಿವೈಎಸ್ ಪಿ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ:

ಪ್ರತಿಯೊಬ್ಬರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ ಎಂದು ನೂತನ ಡಿವೈಎಸ್ ಪಿ ಮತ್ತು ಅಬಕಾರಿ ಡಿವೈಎಸ್ ಪಿ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ 37ನೇ ತಂಡದ ಪ್ರೊಬೆಷನರಿ ಪೊಲೀಸ್ ಉಪಾಧೀಕ್ಷಕರು ಮತ್ತು ಅಬಕಾರಿ ಉಪಾಧೀಕ್ಷಕರು ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಅಸಮಾನತೆ, ಜಾತಿ ತಾರತಮ್ಯ ಇರುವ ಸಮಾಜದಲ್ಲಿ ಅಶಕ್ತರಿಗೂ ನ್ಯಾಯ ಸಿಗುವಂತಾಗಬೇಕು. ಕೇವಲ ಬಲಾಡ್ಯರಿಗೆ ಮಾತ್ರ ನ್ಯಾಯ ಸಿಗುವಂತಾದರೆ ಇಷ್ಟೆಲ್ಲಾ ತರಬೇತಿ ಪಡೆದು ಪ್ರಯೋಜನ ಆಗುವುದಿಲ್ಲ. ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಅತ್ಯಂತ ಕಡಿಮೆ ಇರುವುದನ್ನು ಪ್ರಸ್ತಾಪಿಸಿ ಇದು ಸರಿಯಾಗಬೇಕಿದೆ ಎಂದರು.
ಸುಳ್ಳು ಮತ್ತು ದ್ವೇಷದ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರ ವಿರುದ್ಧ ಅತ್ಯಂತ ನಿಷ್ಠುರವಾಗಿ ವರ್ತಿಸಿ ಪ್ರತಿಯೊಬ್ಬರ ಸಂವಿಧಾನ ಬದ್ದ ಹಕ್ಕುಗಳನ್ನು ರಕ್ಷಿಸುವ ಸವಾಲು ನಿಮ್ಮ ಮೇಲಿದೆ. ದ್ವೇಷ ಕಾರುವವರಿಗೆ ಎಷ್ಟೇ ರಾಜಕೀಯ ಶಕ್ತಿ ಇದ್ದರೂ ಅವರನ್ನು ಮಟ್ಟ ಹಾಕದಿದ್ದರೆ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯವಿಲ್ಲ.
ಶಾಂತಿ-ಸುವ್ಯವಸ್ಥೆ ಇಲ್ಲದ ಸಮಾಜ, ನಾಡು, ದೇಶ ಅಭಿವೃದ್ಧಿ ಹೊಂದಲು, ಪ್ರಗತಿ ಪಥದಲ್ಲಿ ಮುಂದೆ ಸಾಗಲು ಸಾಧ್ಯವೇ ಇಲ್ಲ ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಕರ್ತವ್ಯ ನಿರ್ವಹಿಸಿ ಎಂದು ಕರೆ ನೀಡಿದರು.
ಕರ್ನಾಟಕ ಪೊಲೀಸ್ ಅಕಾಡೆಮಿ ತರಬೇತಿಯಲ್ಲಿ ಉನ್ನತ ಪ್ರತಿಷ್ಠೆ ಗಳಿಸಿದೆ. ಇಲ್ಲಿ ಶಿಸ್ತಿನ ಜತೆಗೆ ಸಾಮಾಜಿಕ ಜವಾಬ್ದಾರಿಯನ್ನು ಪ್ರಶಿಕ್ಷಣಾರ್ಥಿಗಳಿಗೆ ನೀಡಲಾಗುತ್ತಿದೆ ಎಂದು ಮೆಚ್ಚುಗೆ ಸೂಚಿಸಿದರು.

ಸಾರ್ವಜನಿಕ ಜೀವನದಲ್ಲಿ ಇರುವವರೆಗೆ ನಾವು ಸಾಮಾಜಿಕ ಜವಾಬ್ದಾರಿಯನ್ನು , ಜನಸ್ನೇಹಿಗಳಾಗಿರುವುದನ್ನು ಮರೆಯಬಾರದು. ಜನರ ಕಷ್ಟಗಳನ್ನು ಆಲಿಸುವ ಮತ್ತು ಪರಿಹಾರ ಹುಡುಕುವ ತಾಳ್ಮೆ ಇಟ್ಟುಕೊಂಡವರು ಮಾತ್ರ ಸಾರ್ವಜನಿಕ ಜೀವನದಲ್ಲಿರುವ ಅರ್ಹತೆ ಪಡೆದುಕೊಳ್ಳುತ್ತಾರೆ ಎಂದರು.
ಜನರು ನಿಮ್ಮ ಮೇಲೆ ಇಟ್ಟ ವಿಶ್ವಾಸವನ್ನು ಜವಾಬ್ದಾರಿಯಿಂದ ನಿರ್ವಹಿಸಿ. ಪೊಲೀಸರು ಅನೇಕ ಸಂದರ್ಭಗಳಲ್ಲಿ ಕ್ಲಿಷ್ಟ ಪರಿಸ್ಥಿತಿಗಳಲ್ಲಿ ಕೆಲಸ ಮಾಡಬೇಕಾಗುತ್ತದೆ. ಎಂಥಾದ್ದೇ ಸಂದರ್ಭದಲ್ಲೂ ತಾಳ್ಮೆ ಕಳೆದುಕೊಳ್ಳದೆ ಕರ್ತವ್ಯ ನಿರ್ವಹಿಸಬೇಕು ಎಂದರು.
ಗೃಹ ಸಚಿವ ಜಿ.ಪರಮೇಶ್ವರ್ ಅವರು ಅಧ್ಯಕ್ಷತೆ ವಹಿಸಿದ್ದರು.
**********